ಕೊಪ್ಪಳವನ್ನು ಶಿಕ್ಷಣ ಕಾಶಿಯನ್ನಾಗಿ ಮಾಡುವೆ: ಸಂಗಣ್ಣ ಕರಡಿ
ಕೊಪ್ಪಳ,: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ, ಕೊಪ್ಪಳ ಕ್ಷೇತ್ರದಲ್ಲಿ ಸರ್ಕಾರಿ ಹೈಟೆಕ್ ಶಾಲಾ, ಕಾಲೇಜು ನಿರ್ಮಿಸಿ ಶಿಕ್ಷಣ ಕಾಶಿಯನ್ನಾಗಿ ಮಾಡಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಭರವಸೆ ನೀಡಿದರು. ತಾಲೂಕಿನ ವಿಧಾನಸಭಾ ಕ್ಷೇತ್ರದ ಹಲಗೇರಿ, ಹಂದ್ರಾಳ, ಹಣವಾಳ ಸೇರಿ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಪರ ಪ್ರಚಾರ ನಡೆಸಿ ಮಾತನಾಡಿದರು.
ಕೊಪ್ಪಳ ಕ್ಷೇತ್ರದಲ್ಲಿ ಸರ್ಕಾರಿ ಹೈಟೆಕ್ ಶಾಲಾ ಮತ್ತು ಕಾಲೇಜುಗಳ ಕೊರತೆ, ಗುಣಮಟ್ಟದ ಶಿಕ್ಷಣದ ಕೊರತೆ, ತಂತ್ರಜ್ಞಾನ ಆಧಾರಿತ ಶಿಕ್ಷಣ ಸಿಗದಿರುವ ಕಾರಣ ಮಕ್ಕಳು ಮಂಗಳೂರು, ಮೈಸೂರು, ಹುಬ್ಬಳ್ಳಿ, ಬೆಂಗಳೂರು ಮಹಾನಗರ ಗಳಿಗೆ ಹೋಗಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಇದರಿಂದ ಪೋಷಕರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಆದ್ದರಿಂದ ಬಿಜೆಪಿ ಸರ್ಕಾರ ಬಂದರೆ, ಕ್ಷೇತ್ರದ ಲ್ಲಿ ಹೈಟೆಕ್ ಶಾಲಾ- ಕಾಲೇಜು ನಿರ್ಮಾಣ ಮಾಡಲಾಗುವುದು. ಕೌಶಲ್ಯಾಧಾರಿತ ಕೋಸ್೯ ಗಳನ್ನು ಅಳವಡಿಸಿ ಶಿಕ್ಷಣ ನೀಡಿ ಕ್ಷೇತ್ರವನ್ನು ಶಿಕ್ಷಣ ಕಾಶಿಯನ್ನಾಗಿ ಮಾಡುವುದು ನನ್ನ ಕನಸಾಗಿದೆ ಎಂದರು.
ಕ್ಷೇತ್ರದಲ್ಲಿನ ಸರ್ಕಾರಿ ಶಾಲಾ -ಕಾಲೇಜು ಗಳು ದುರಸ್ತಿಯಾಗಬೇಕಿದ್ದು, ಮೂಲಸೌಕರ್ಯ ವಂಚಿತವಾಗಿವೆ. ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗುತ್ತಿವೆ. ಇದಕ್ಕೆ ಮೂಲಭೂತ ಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣದ ಕೊರತೆಯೆಂಬುದು ಸಮೀಕ್ಷೆ ಮೂಲಕ ಬಹಿರಂಗವಾಗಿದೆ. ಕ್ಷೇತ್ರದಲ್ಲಿ ಹತ್ತು ವರ್ಷ ಶಾಸಕರಾಗಿದ್ದ ವರು ಸರ್ಕಾರಿ ಶಾಲಾ- ಕಾಲೇಜು ಅಭಿವೃದ್ಧಿಗೆ ಸಹಕಾರ ನೀಡಲಿಲ್ಲ. ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಶಾಲಾ - ಕಾಲೇಜುಗಳ ಬಗ್ಗೆ ಗಮನ ಹರಿಸಲಿಲ್ಲ. ಇದರ ಪರಿಣಾಮವೇ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕಳಪೆ ಸಾಧನೆಯಾಗುತ್ತಿದೆ. ಆದರೆ, ಈ ಬಾರಿ ಬಿಜೆಪಿಗೆ ಮತ ನೀಡಿ ಸರ್ಕಾರಿ ಶಾಲೆಗಳನ್ನು ಯಾವ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಮಾಡಿ ತೋರಿಸುತ್ತೇವೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ಶಿಕ್ಷಣಕ್ಕೆ ಆದ್ಯತೆ ನೀಡಿ ಬಜೆಟ್ ನಲ್ಲಿ ಹೆಚ್ಚಿನ ಪಾಲು ಶಿಕ್ಷಣ ಇಲಾಖೆಗೆ ನೀಡಿದೆ. ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶೌಚಾಲಯ ನಿರ್ಮಾಣ ಮಾಡುತ್ತಿದ್ದು, ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಆದರೆ, ಕ್ಷೇತ್ರದ ಶಾಸಕರಿಗೆ ಇಚ್ಛಾಶಕ್ತಿ ಇಲ್ಲ. ಆದ್ದರಿಂದಲೇ ಶಾಲಾ - ಕಾಲೇಜುಗಳ ಸ್ಥಿತಿ ಶೋಚನೀಯ ವಾಗಿವೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರನ್ನು ಗೆಲ್ಲಿಸಿ ವಿಧಾನಸಭೆ ಗೆ ಕಳುಹಿಸಿ, ಶಾಲಾ- ಕಾಲೇಜು ಅಭಿವೃದ್ಧಿ ಗೆ ಸಹಕರಿಸಿ ಎಂದರು.
ಈ ಸಂದರ್ಭದಲ್ಲಿ ಯುವಕರು, ಮಹಿಳೆಯರು, ಹಿರಿಯರು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.